ಮುಂಬೈ(Mumbai): ಶಿವಸೇನಾದ ಬಂಡಾಯ ಶಾಸಕರು ನಾಳೆ ಮುಂಬೈಗೆ ಆಗಮಿಸಲಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ ಸರ್ಕಾರದ ವಿರುದ್ಧ ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜೂನ್ 30ರಂದು 11 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ಭಗತ್ಸಿಂಗ್ ಕೋಶಿಯಾರಿ ಸೂಚಿಸಿದ್ದಾರೆ.
ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ವಾಪಸ್ ಆಗುವ ಪ್ರಯತ್ನದಲ್ಲಿದ್ದು, ರಾಜ್ಯಪಾಲ ಕೋಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವಂತೆ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸೂಚಿಸುವಂತೆ ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಏಕನಾಥ ಶಿಂಧೆ ಅವರು ಮುಂಬೈಗೆ ವಾಪಸ್ ಆಗುವುದಾಗಿ ಘೋಷಿಸಿದ್ದಾರೆ.
ಗುವಾಹಟಿಯ ಕಾಮಾಕ್ಯ ದೇವಸ್ಥಾನದಲ್ಲಿ ಮಹಾರಾಷ್ಟ್ರದ ಜನರ ಏಳ್ಗೆಗೆ ಮತ್ತು ಶಾಂತಿಗೆ ಪ್ರಾರ್ಥನೆ ಸಲ್ಲಿಸಿದ್ದಾಗಿ ಶಿಂಧೆ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಗುವಾಹಟಿಯ ಐಶಾರಾಮಿ ಹೋಟೆಲ್ನಲ್ಲಿ ಶಿಂಧೆ ನೇತೃತ್ವದಲ್ಲಿ ಬಂಡಾಯ ಶಾಸಕರು ಬೀಡುಬಿಟ್ಟಿದ್ದಾರೆ.














