ಜಲ್ನಾ, ಮೇ 30: ಮರಾಠಾ ಮೀಸಲಾತಿ ಹೋರಾಟದ ಪ್ರಮುಖ ಮುಖಂಡ Manoj Jarange ಅವರು ಶನಿವಾರ ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ತಮ್ಮ 9ನೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇದರೊಂದಿಗೆ ಮೀಸಲಾತಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರದ ಮೇಲೆ ಮತ್ತೊಮ್ಮೆ ಒತ್ತಡ ಹೆಚ್ಚಾಗಿದೆ.
ಪ್ರತಿಭಟನೆ ಆರಂಭವಾದ ಬೆನ್ನಲ್ಲೇ ಮರಾಠಾ ಮೀಸಲಾತಿ ಸಂಪುಟ ಉಪಸಮಿತಿಯ ಅಧ್ಯಕ್ಷ ಹಾಗೂ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಜರಂಗೆ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಅವರು ಪ್ರಯತ್ನಿಸಿದ್ದಾರೆ.
ಮುಂಬೈನಿಂದ ಸುಮಾರು 400 ಕಿಲೋ ಮೀಟರ್ ದೂರದಲ್ಲಿರುವ ಅಂತರವಾಲಿ ಸಾರತಿ ಗ್ರಾಮದಲ್ಲಿ ತೀವ್ರ ಬಿಸಿಲಿನ ನಡುವೆಯೂ ಯಾವುದೇ ಛಾವಣಿ ಅಥವಾ ರಕ್ಷಣಾತ್ಮಕ ವ್ಯವಸ್ಥೆ ಇಲ್ಲದೆ ಜರಂಗೆ ತಮ್ಮ ಪ್ರತಿಭಟನೆ ಆರಂಭಿಸಿದ್ದಾರೆ.
ಸರ್ಕಾರ ಮರಾಠಾ ಸಮುದಾಯವನ್ನು ಮತ್ತಷ್ಟು ಪರೀಕ್ಷೆಗೆ ಒಳಪಡಿಸಬಾರದು ಎಂದು ಎಚ್ಚರಿಕೆ ನೀಡಿರುವ ಜರಂಗೆ, ತಮ್ಮ ಬೇಡಿಕೆಗಳಿಗೆ ಸ್ಪಷ್ಟ ಮತ್ತು ಲಿಖಿತ ಭರವಸೆ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಮರಾಠಾ ಸಮುದಾಯದ ಸದಸ್ಯರಿಗೆ ಒಬಿಸಿ ಮೀಸಲಾತಿಯ ಲಾಭ ಪಡೆಯಲು ಕುನ್ಬಿ ಜಾತಿ ಪ್ರಮಾಣಪತ್ರ ನೀಡಬೇಕು, ಹೈದರಾಬಾದ್ ಮತ್ತು ಸತಾರಾ ಗೆಜೆಟ್ ದಾಖಲೆಗಳನ್ನು ಜಾರಿಗೆ ತರಬೇಕು ಹಾಗೂ ಮೀಸಲಾತಿ ಹೋರಾಟದ ವೇಳೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದರ ಜೊತೆಗೆ, ಇತರ ಹಿಂದುಳಿದ ವರ್ಗಗಳಿಗಾಗಿ ಇರುವ ಮಾದರಿಯಲ್ಲೇ ಮರಾಠಾ ಸಮುದಾಯಕ್ಕಾಗಿ ಪ್ರತ್ಯೇಕ ಸಚಿವಾಲಯ ರಚಿಸಬೇಕು ಎಂಬ ಬೇಡಿಕೆಯನ್ನು ಸಹ ಮುಂದಿಟ್ಟಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಜೊತೆಗೆ ಜರಂಗೆ ಅವರು ಬಿಸಿಲಿನಲ್ಲಿ ಕುಳಿತುಕೊಳ್ಳದೆ ಛಾವಣಿಯಡಿ ತೆರಳುವಂತೆ ಮನವಿ ಮಾಡಿದರು. ಆದರೆ ತಮ್ಮ ಬೇಡಿಕೆಗಳಿಗೆ ಸ್ಪಷ್ಟ ಕ್ರಮ ಕೈಗೊಳ್ಳುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಜರಂಗೆ ತಿಳಿಸಿದ್ದಾರೆ.

















