ಮನೆ ರಾಷ್ಟ್ರೀಯ ಮೇಕೆದಾಟು ಯೋಜನೆ ವಿಚಾರ: ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಮೇಕೆದಾಟು ಯೋಜನೆ ವಿಚಾರ: ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

0

ನವದೆಹಲಿ (New Delhi): ಮೇಕೆದಾಟು ಯೋಜನೆ ವಿಚಾರದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ಣಯ ಪರಿಗಣಿಸಬಾರದು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅಲ್ಲದೆ, ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದೆ.
ಕರ್ನಾಟಕ ಸರ್ಕಾರದ ಪ್ರಸ್ತಾಪಿತ ಮೇಕೆದಾಟು ಯೋಜನೆಯ ಯೋಜನಾ ವರದಿಗೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಯಾವುದೇ ಆದೇಶ ಅಥವಾ ನಿರ್ದೇಶನವನ್ನು ನೀಡದಂತೆ ತಮಿಳುನಾಡು ಸರ್ಕಾರ ಕಳೆದ ವಾರ ಅರ್ಜಿ ಸಲ್ಲಿಸಿತ್ತು. ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿತ್ತು.
ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ಸಭೆ ಸೇರಲಿದೆ.
ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್ ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ವಕೀಲರೊಂದಿಗೆ ಚರ್ಚೆ ನಡೆಸಿದ್ದರು.
ನ್ಯಾಯಾಲಯದಲ್ಲಿ ನಮ್ಮ ವಾದಗಳು ನ್ಯಾಯೋಚಿತವಾಗಿವೆ ಮತ್ತು ನ್ಯಾಯಾಲಯದಿಂದ ಅನುಕೂಲಕರ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದ್ದರು.
ದೊರೈಮುರುಗನ್ ಜೂನ್ 22 ರಂದು ನವದೆಹಲಿಗೆ ಪಕ್ಷದ ನಾಯಕರ ನಿಯೋಗದೊಂದಿಗೆ ತೆರಳಿದ್ದರು. ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿರುವುದರಿಂದ ಅಣೆಕಟ್ಟು ಯೋಜನೆ ಕುರಿತು ಯಾವುದೇ ಚರ್ಚೆಗೆ ಅವಕಾಶ ನೀಡದಂತೆ ಕೇಂದ್ರ ಸಚಿವರನ್ನು ಒತ್ತಾಯಿಸಿದ್ದರು.

ಹಿಂದಿನ ಲೇಖನಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್
ಮುಂದಿನ ಲೇಖನಉಡುಪಿ: ಟೋಲ್ ಗೇಟ್ ಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್; ನಾಲ್ವರ ದುರ್ಮರಣ