ನವದೆಹಲಿ : ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 23ಕ್ಕೆ ಮುಂದೂಡಿದೆ.
ಧರ್ಮಸ್ಥಳದಲ್ಲಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ತಾಯಿ ಕುಸುಮವತಿ ಗೌಡ ಸಲ್ಲಿಸಿದ್ದ, ಅರ್ಜಿಯನ್ನು ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆ ಸಮಯದಲ್ಲಿ ವಕೀಲರ ಅನುಪಸ್ಥಿತಿ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಯಿತು.
ಸತತವಾಗಿ ಎರಡು ವರ್ಷಗಳವರೆಗೆ ನೂರಾರು ಅನಾಥ ಶವಗಳನ್ನು ಹೂತುಹಾಕಿದ್ದಾಗಿ ಈ ಹಿಂದೆ ಹೇಳಿಕೆ ನೀಡಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರು ಉಲ್ಟಾ ಹೊಡೆದಿದ್ದೇಕೆ ಎಂಬುದರ ಬಗ್ಗೆಯೂ ತನಿಖೆಯಾಗಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಿದ್ದಾರೆ.
ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ 74 ಅನಾಥ ಶವಗಳನ್ನು ಹೂತು ಹಾಕಿರುವುದಾಗಿ ಆರೋಪಗಳು ಕೇಳಿಬಂದಿವೆ. ಆ ಎಲ್ಲಾ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ಆಗಿ ತನಿಖೆಯಾಗಬೇಕು. ಧರ್ಮಸ್ಥಳದಲ್ಲಿ ಸಿಕ್ಕ ಅನಾಥ ಶವಗಳು, ನಾಪತ್ತೆ ಪ್ರಕರಣಗಳಿಗೆ ಇದರಿಂದ ಸೂಕ್ತ ನ್ಯಾಯ ಸಿಗುವಂತಾಗಬೇಕು ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.














