ಮೈಸೂರು: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ತಮ್ಮ ವಕೀಲರ ಮೂಲಕ ನೋಟಿಸ್ ಕಳುಹಿಸಿ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಶಾಸಕ ಟಿ. ಎಸ್. ಶ್ರೀವತ್ಸ ಪರ ವಕೀಲರು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾನೂನು ಕ್ರಮದ ನೋಟಿಸ್ ಜಾರಿ ಮಾಡಿದ್ದಾರೆ.
ಇತ್ತೀಚಿಗೆ ಎಂ. ಲಕ್ಷ್ಮಣ್ ಅವರು ಮಾಧ್ಯಮಗೋಷ್ಟಿ ನಡೆಸಿ ಶಾಸಕ ಟಿ. ಎಸ್. ಶ್ರೀವತ್ಸ ವಿರುದ್ಧ ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಪರ ವಕೀಲ ವಿ. ರವಿಕುಮಾರ್ ಎಂ. ಲಕ್ಷ್ಮಣ್ ಅವರಿಗೆ ನೋಟಿಸ್ ನೀಡಿದ್ದಾರೆ.
“7 ದಿನಗಳ ಒಳಗೆ ಈ ಬಗ್ಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು” ಎಂದು ನೋಟಿಸ್ನಲ್ಲಿ ಎಚ್ಚರಿಕೆ ನೀಡಿದ್ದಾರೆ.