ಬೆಂಗಳೂರು : ಮಾ ಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನದಿಂದಾಗಿ ಬುಧವಾರ (ನ.5) ನಿಗದಿಯಾಗಿದ್ದ “ನೀರಿನ ಹೆಜ್ಜೆ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಹೆಚ್.ವೈ ಮೇಟಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಮುಖ್ಯಮಂತ್ರಿಗಳು ನನಗೆ ಕರೆ ಮಾಡಿ ಬಾಗಲಕೋಟೆಗೆ ಹೋಗುವ ಬಗ್ಗೆ ಚರ್ಚೆ ಮಾಡಿದರು. ಹೀಗಾಗಿ ಮತ್ತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ, ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಹೇಳಿದರು
ಮೇಟಿ ಅವರು ನನಗೆ ಬಹಳ ಆತ್ಮೀಯರು. ಸಿದ್ದರಾಮಯ್ಯ ಅವರ ಜೊತೆಯಲ್ಲೇ ನಮ್ಮ ಪಕ್ಷಕ್ಕೆ ಸೇರಿ ಶಾಸಕರಾಗಿ ಹಾಗೂ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈಗ ಬಿಟಿಡಿಎ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.














