ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇಂದು ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್ ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.
ದೇಶಪಾಂಡೆ ಅವರನ್ನು ಸ್ಪೀಕರ್ ಹುದ್ದೆಯನ್ನು ನಿಭಾಯಿಸಲು ಕೇಳಲಾಯಿತು. ಆದರೆ, ಅವರು ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಹುದ್ದೆಯನ್ನು ನಿರಾಕರಿಸಿದರು. ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್ ಕೆ ಪಾಟೀಲ್ ಅವರನ್ನು ಕೂಡ ಸ್ಪೀಕರ್ ಹುದ್ದೆಗೆ ಪಕ್ಷ ಪರಿಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನೂ ಸಂಪರ್ಕಿಸಲಾಗಿತ್ತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ಸ್ಪೀಕರ್ ಆಯ್ಕೆಯಲ್ಲಿ ಪಕ್ಷವು ನಿರ್ಧಾರಕ್ಕೆ ಬರಲು ಸಹಾಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಬಸವರಾಜ ರಾಯರೆಡ್ಡಿ, ಮಧುಗಿರಿಯ ಶಾಸಕರಾದ ಕೆ.ಎನ್. ರಾಜಣ್ಣ, ಮೊಳಕಾಲ್ಮೂರಿನ ಎನ್.ವೈ. ಗೋಪಾಲಕೃಷ್ಣ ಅವರ ಮನವೊಲಿಸಲು ಪಕ್ಷದ ನಾಯಕತ್ವ ಯತ್ನಿಸಿ ವಿಫಲವಾಯಿತು.
ಮೂರು ದಿನಗಳ ವಿಧಾನಮಂಡಲದ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಹಿರಿಯ ಶಾಸಕರು ಕ್ಯಾಬಿನೆಟ್ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ.