ಮನೆ ಕಾನೂನು ಮುಡಾ ಪ್ರಕರಣ: ಲೋಕಾಯುಕ್ತ ತನಿಖೆಗೆ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಹಾಜರು

ಮುಡಾ ಪ್ರಕರಣ: ಲೋಕಾಯುಕ್ತ ತನಿಖೆಗೆ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಹಾಜರು

0

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿಯಾಗಿರುವ ದೇವರಾಜು ಗುರುವಾರ ಲೋಕಾಯುಕ್ತ ತನಿಖೆಗೆ ಹಾಜರಾಗಿದ್ದಾರೆ. ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ನೋಟಿಸ್​ ಜಾರಿ ಮಾಡಿದ್ದರು.

Join Our Whatsapp Group

ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್ಐಆರ್ ದಾಖಲಾಗಿತ್ತು. ಕೇಸ್ ನಂಬರ್ 11/2024 ಅಡಿ ಎಫ್ಐಆರ್ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ A1, A2 ಆಗಿ ಸಿಎಂ ಪತ್ನಿ ಪಾರ್ವತಿ, A3 ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು A4 ಆರೋಪಿಯಾಗಿದ್ದಾರೆ. ಕೋರ್ಟ್​ ನಿರ್ದೇಶನದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು. ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ.

ಮುಡಾಗೆ ಇಡಿ ನೋಟಿಸ್‌: ಕಳೆದ 9 ವರ್ಷಗಳಲ್ಲಿ ಮುಡಾದಲ್ಲಿ 50:50 ಬದಲಿ ನಿವೇಶನ ಹಾಗೂ ಇತರ ಅಕ್ರಮಗಳ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ 500 ಪುಟದ ದಾಖಲೆಗಳನ್ನು ಇಡಿಗೆ ತಲುಪಿಸಿದ್ದು, ದೂರು ಸಹ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಡಿ ತನಿಖೆಗೂ ಹಾಜರಾಗಿದ್ದರು. ಇದರ ನಡುವೆ ಇಡಿ ಅಧಿಕಾರಿಗಳು ಮೂರು ದಿನಗಳಲ್ಲಿ ಅಗತ್ಯ ಹಣಕಾಸು ವಹಿವಾಟು ನಡೆದಿರುವ ಮಾಹಿತಿ ನೀಡುವಂತೆ ಮುಡಾಗೆ ಮಂಗಳವಾರ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.