ಚಿಕ್ಕೋಡಿ, ನವೆಂಬರ್ 20: ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಬಳಲಿರುವ ಘಟನೆ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೋರ್ವೆಲ್ ಮೂಲಕ ನಲ್ಲಿಗೆ ನೀರು ಸರಬರಾಜು ಮಾಡಲಾಗುತ್ತದೆ. ನೀರು ಸರಬರಾಜು ಮಾಡುವ ಪೈಪ್ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ. ಈ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಬಳಲಿದ್ದಾರೆ. ಇವರಲ್ಲಿ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದವರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲೇ ಚಿಕಿತ್ಸೆ ನೀಡಿದ್ದಾರೆ. ವೈದ್ಯಾಧಿಕಾರಿಗಳ ತಂಡ ಕಸನಾಳ ಗ್ರಾಮದಲ್ಲಿ ಬೀಡುಬಿಟ್ಟಿದೆ.