ಬೆಂಗಳೂರು : ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.15, 16 ಮತ್ತು 17 ರಂದು ಕಾವೇರಿ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ ಮೂರು ದಿನಗಳಲ್ಲಿ ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು ಎಂದಿದ್ದಾರೆ.
ಗ್ರೇಟರ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಕಾವೇರಿ 5ನೇ ಹಂತದ ಜಲರೇಚಕ ಯಂತ್ರಗಾರಗಳು (ಪಂಪಿಂಗ್ ಸ್ಟೇಷನ್) ಸೆ.15 ರ ನಸುಕಿನ ಜಾವ 1 ಗಂಟೆಯಿಂದ ಸೆ.17ರ ಮಧ್ಯಾಹ್ನ 1 ಗಂಟೆವರೆಗೆ ಒಟ್ಟು 60 ಗಂಟೆಗಳು. ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1, ಹಂತ-2, ಹಂತ-3, ಹಂತ-4 ರ 1ನೇ ಘಟ್ಟ ಮತ್ತು 2ನೇ ಘಟ್ಟಗಳ ಜಲರೇಚಕ ಯಂತ್ರಗಾರಗಳನ್ನು ಸೆ.16 ರ ಬೆಳಗ್ಗೆ 6ರಿಂದ ಸೆ.17ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ.
ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು. ಸಂಚಾರಿ ಕಾವೇರಿ ಯೋಜನೆಯ ಸೇವೆಯಲ್ಲಿ ಈ ಮೂರು ದಿನಗಳ ಕಾಲ ವ್ಯತ್ಯಯವಾಗಲಿದೆ. ಕಾವೇರಿ ನೀರು ಸರಬರಾಜಾಗುವ ಪ್ರದೇಶಗಳ ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.















