ತುಮಕೂರು(Tumkur): ಪೊಲೀಸರ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಮಾಡುವಂತೆ ಸಾಕಷ್ಟು ಒತ್ತಡಗಳು ಬಂದಿವೆ. ಈ ಕುರಿತು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಹೇಳಿದರು.
ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಯುವ ಶಕ್ತಿ ಇರಬೇಕು ಎಂಬುದು ನನ್ನ ಆಶಯ. ಆದರೆ ಒತ್ತಡಗಳು ಹೆಚ್ಚಾಗುತ್ತಿವೆ. ಒತ್ತಡಗಳು ಬಂದ ಕಾರಣಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಒಂದು ತಿಂಗಳು ಕಾಲ ಮುಂದೂಡಲಾಗಿದೆ. ಎರಡು ವರ್ಷ ಸಡಿಲಿಕೆ ಮಾಡುವ ಆಲೋಚನೆ ಇದೆ. ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಚಿವರ ಕಾಲಿಗೆ ಬಿದ್ದು ಮನವಿ: ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ನೂರಾರು ಯುವಕರು ಸಚಿವ ಆರಗ ಜ್ಞಾನೇಂದ್ರ ಕಾಲಿಗೆ ಬಿದ್ದು, ಕಣ್ಣೀರಿಟ್ಟು ವಯೋಮಿತಿ ಸಡಿಲಿಸುವಂತೆ ಕೇಳಿಕೊಂಡರು.
ಕೋವಿಡ್ ಹಾಗೂ ಇತರ ಕಾರಣಗಳಿಂದಾಗಿ ಪೊಲೀಸರ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಿದ್ದು, ವಯೋಮಿತಿ ಸಡಿಲಿಸದಿದ್ದರೆ ಸಾಕಷ್ಟು ಮಂದಿಗೆ ಉದ್ಯೋಗ ಸಿಗುವುದಿಲ್ಲ. ಒಂದು ಬಾರಿಯಾದರೂ ಅವಕಾಶ ಮಾಡಿಕೊಡಬೇಕು ಎಂದು ಯುವಕ, ಯುವತಿಯರು ಪರಿಪರಿಯಾಗಿ ಬೇಡಿಕೊಂಡರು.














