ಗಾಯಕ ಸೋನು ನಿಗಮ್ಗೆ ಶಾಕ್ ಕೊಡಲು ಅವಲಹಳ್ಳಿ ಪೊಲೀಸರು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಈಗ ಪೊಲೀಸರು ಕಾನೂನು ಸಮರ ಆರಂಭಿಸಲು ಮುಂದಾಗಿದ್ದಾರೆ.
ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸೋನು ನಿಗಮ್ ಅವರಲ್ಲಿ ಕನ್ನಡ ಹಾಡನ್ನು ಹಾಡುವಂತೆ ಕನ್ನಡ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದರು.
ಈ ಬೇಡಿಕೆಗೆ ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಸೋನು ನಿಗಮ್ ಮಾತನಾಡಿದ್ದರು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಬೆನ್ನಲ್ಲೇ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಯಕ ಸೋನು ನಿಗಮ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಕೋರ್ಟ್ ಮೊರೆ ಹೋಗಿದ್ದರಿಂದ ಬಂಧನ ಮಾಡಬಾರದು ಸೋನು ನಿಗಮ್ ತನಿಖೆಗೆ ಸಹಕಾರ ನೀಡಬೇಕೆಂದು ಹೈ ಕೋರ್ಟ್ ಆದೇಶ ನೀಡಿತ್ತು. ಈ ಆದೇಶದ ಅನ್ವಯ ಅವಲಹಳ್ಳಿ ಪೊಲೀಸರು ತನಿಖೆ ಹಾಜರಾಗುವಂತೆ ನಾಲ್ಕು ಬಾರಿ ಸೋನು ನಿಗಮ್ಗೆ ನೋಟಿಸ್ ಕೊಟ್ಟಿದ್ದಾರೆ.
ನೋಟಿಸ್ ಅಲ್ಲದೇ ಪೋನ್ ಕರೆ ಮಾಡಿ ತನಿಖೆಗೆ ಸಮಯ ಅವಕಾಶ ಕೊಡುವಂತೆ ಮನವಿ ಮಾಡಿದ್ದರು. ಪೊಲೀಸರ ಫೋನ್ ಕರೆ ಮಾಡಿ ತಿಳಿಸಿದ್ದರೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಅವಲಹಳ್ಳಿ ಪೊಲೀಸರು ಹೈಕೋರ್ಟ್ ಮಧ್ಯಂತರ ಆದೇಶ ತೆರವು ಮಾಡಿಸಲು ಅಡ್ವೊಕೇಟ್ ಜನರಲ್ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.















