ಮನೆ ರಾಜ್ಯ ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ – ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ..!

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ – ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ..!

0

ಬೆಂಗಳೂರು : ವಾಸ್ತು ಹೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗರ್ಭಿಣಿ ಮಹಿಳೆ ದೂರು ನೀಡಿದ್ದು, ಇತ್ತ ಹಣಕ್ಕೆ ಬೇಡಿಕೆಯಿಟ್ಟು ಕೇಸ್ ಹಾಕ್ತೀನಿ ಅಂತ ಬೆದರಿಕೆ ಹಾಕಿದ್ದಾರೆಂದು ಗುರೂಜಿ ಪ್ರತಿದೂರು ದಾಖಲಿಸಿದ್ದಾರೆ.

ವಾಸ್ತು ಹೇಳುವ ನೆಪದಲ್ಲಿ ಗರ್ಭಿಣಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ವಿಜಯನಗರದ `ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ನಲ್ಲಿ ಏ.4ರಂದು ಘಟನೆ ನಡೆದಿದೆ. ತಮ್ಮ ವಾಸದ ಮನೆಯ ವಾಸ್ತು ವಿಚಾರಿಸಲು ಹೋದಾಗ ಸಂತ್ರಸ್ತೆಗೆ ಈ ಕಹಿ ಅನುಭವವಾಗಿದೆ. ಘಟನೆ ನಡೆದಾಗ ಶಾಂತಕುಮಾರ್, ಭರತ್, ಶಾಂತಕುಮಾರ್ ಪತ್ನಿ ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದರು ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತೆ ಗೋವಿಂದರಾಜನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವಾಸ್ತು ಹೇಳುವ ನೆಪದಲ್ಲಿ ಶಾಂತಕುಮಾರ್ ಎಂಬುವವರು ಅಸಭ್ಯವಾಗಿ ವರ್ತಿಸಿದ್ದು, ಎದೆ ಮತ್ತು ಹೊಟ್ಟೆಯ ಭಾಗವನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ವಾಸ್ತು ಸಲಹೆ ನೀಡಲು 15 ಸಾವಿರ ರೂ. ನಗದು ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆಯ ದೂರಿನ ಬೆನ್ನಲ್ಲೇ ಶಾಂತಕುಮಾರ್ ಅವರು ಕೂಡ ಸಂತ್ರಸ್ತೆ ಹಾಗೂ ಸಹಚರರ ವಿರುದ್ಧ ದೂರು ದಾಖಲಿಸಿದ್ದು, ಪ್ರತಿಯಾಗಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ, ಜಮಾಲ್ ಮತ್ತು ಅಮೃತಲಿಂಗಂ ಎಂಬ ಮೂವರು ವ್ಯಕ್ತಿಗಳು ತಮ್ಮ ಕಚೇರಿಗೆ ಬಂದು ಹಣಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಹಣ ನೀಡಲು ನಿರಾಕರಿಸಿದಾಗ, ತಮ್ಮ ಮೇಲೆ ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿದ್ದಾರೆ.

ನನ್ನ ಪತ್ನಿ ಬಿಡಿಸಲು ಬಂದಾಗ, ಅವರ ಮೇಲೆಯೂ ಜಮಾಲ್ ಮತ್ತು ಅಮೃತಲಿಂಗಂ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ಆರೋಪಿಗಳು ಸಂಘಟನೆ ಹಾಗೂ ಪೊಲೀಸ್ ಇಲಾಖೆಗೆ ಸೇರಿದವರು ಹಾಗೂ ಮಾಧ್ಯಮದವನು ಎಂದು ಹೇಳಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಹಣ ನೀಡದಿದ್ದರೆ ಮಾನ ಹರಾಜು ಹಾಕುವುದಾಗಿ ಬೆದರಿಸಿದ್ದಾ. ಅಲ್ಲದೇ 1 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದಾರೆ.

ಮೂವರು ಸೇರಿಕೊಂಡು ನನ್ನ ಹಾಗೂ ನನ್ನ ಹೆಂಡತಿಯನ್ನು ಬಲವಂತವಾಗಿ ಆಟೋದಲ್ಲಿ ಕುಳ್ಳಿರಿಸಿಕೊಂಡು ಜಯನಗರದ ಕಡೆಗೆ ಕರೆದೊಯ್ದಿದ್ದಾರೆ. ಆಟೋದಲ್ಲಿ ಹೋಗುವಾಗ ಸಂತ್ರಸ್ತೆ ನನ್ನ ಬಟ್ಟೆಯನ್ನು ನಾನೇ ಬಿಚ್ಚಿಕೊಂಡು, ನಿನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದೆ ಎಂದು ಕೇಸ್ ಹಾಕಿ, ಮಾನ ಕಳೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ. ದಾರಿಯುದ್ದಕ್ಕೂ ಹಲ್ಲೆ ಮುಂದುವರಿದಾಗ ನಾನು ಕಿರುಚಿಕೊಂಡೆ. ಆಗ ಆಟೋ ನಿಲ್ಲಿಸಿದ್ದು, ಅಲ್ಲಿಂದ ತಪ್ಪಿಸಿಕೊಂಡು ಬಂದು ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಎರಡೂ ದೂರುಗಳ ಆಧಾರದ ಮೇಲೆ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.