ಮನೆ ರಾಜ್ಯ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ: ಭಾರೀ ಬಹುಮತದಿಂದ ಗೆಲುವು –...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ: ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

0

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು.

ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.  ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ವಿಧಾನಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸ್ವತಃ ಪುಟ್ಟಣ್ಣ ಅವರೇ ಕಣಕ್ಕಿಳಿದಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾತನಾಡಿ, ಪುಟ್ಟಣ್ಣ ಅವರು ಶಿಕ್ಷಕರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ನಾಯಕರಾಗಿದ್ದು, ಅವರು ಈ ಬಾರಿ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ಸಚಿವ ಸುಧಾಕರ್‌ ಮಾತನಾಡಿ, ಈಗಾಗಲೇ ನಾಲ್ಕು ಬಾರಿ ಮೇಲ್ಮನೆಗೆ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಶಿಕ್ಷಕರು ಮತ್ತು ಶಿಕ್ಷಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ‌. ಪಟ್ಟಣ್ಣ ಗೆಲುವು ನಿಶ್ಚಿತ ಎಂದು ಹೇಳಿದರು.

 ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಂದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕ ಸಮುದಾಯದ ಪ್ರತಿಯೊಂದು ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡುತ್ತೇವೆ. ಶಿಕ್ಷಕ ಸಮುದಾಯ ಮತ್ತೊಮ್ಮೆ ತಮ್ಮನ್ನು ಬೆಂಬಲಿಸಲಿದೆ ಎಂದು ಹೇಳಿದರು.

 ಶಾಸಕ ಬಾಲಕೃಷ್ಣ ಮಾತನಾಡಿ, ಪುಟ್ಟಣ್ಣ ಸದಾ ಶಿಕ್ಷಕರ ಬಗ್ಗೆ ತುಡಿತ ಮತ್ತು ಕಾಳಜಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ಪುಟ್ಟಣ್ಣ ಅವರು ಶಾಸಕರಾಗಲು ಪ್ರಯತ್ನಿಸಿದರು. ಆದರೆ ಶಿಕ್ಷಕರ ಸೆಳೆತ ಅವರನ್ನು ಮತ್ತೆ ಶಿಕ್ಷಕರ ಕ್ಷೇತ್ರಕ್ಕೆ ವಾಪಸ್‌ ಕರೆತಂದಿದೆ ಎಂದರು.

ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ಆನೇಕಲ್‌ ರಾಮೋಜಿಗೌಡ ಮಾತನಾಡಿ, ಪಟ್ಟಣ್ಣ ಜನಾನುರಾಗಿ. ಜನಪರ, ಜನಪ್ರಿಯ ನಾಯಕ. ಅವರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸುತ್ತೇವೆ ಎಂದರು.

ಹಿಂದಿನ ಲೇಖನಹನುಮ‌ ಧ್ವಜ ತೆರವು: ಕೆರಗೋಡು ಗ್ರಾಮದಿಂದ ಮಂಡ್ಯ ಡಿಸಿ ಕಚೇರಿವರೆಗೆ ಪಾದಯಾತ್ರೆ
ಮುಂದಿನ ಲೇಖನಹುಟ್ಟು ಹಬ್ಬ ಆಚರಿಸುವ ವೇಳೆ ಗಲಾಟೆ: ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ