‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ.
ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರಪ್ರಶಸ್ತಿ ಇದು ಎನ್ನಲಾಗುತ್ತಿದೆ.
ದಶಕಗಳ ಹಿಂದೆ ನಟ ಕಮಲ್ ಹಾಸನ್ ಸಹೋದರ ಚಾರುಹಾಸನ್ ಅವರಿಗೆ ಕನ್ನಡದ ‘ತಬರನ ಕತೆ’ ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ಕನ್ನಡ ಸಿನಿಮಾದಲ್ಲಿ ನಟಿಸಿದ್ದಕ್ಕೆ ಇನ್ಯಾವುದೇ ನಟರಿಗೆ ರಾಷ್ಟ್ರಪ್ರಶಸ್ತಿ ದೊರೆತಿರಲಿಲ್ಲ. ಅದರಲ್ಲಿಯೂ ಕರ್ನಾಟಕದವರೇ ಆದ ನಟರಿಗೆ ರಾಷ್ಟ್ರಪ್ರಶಸ್ತಿ ದೊರೆತಿರಲಿಲ್ಲ. ಇದೀಗ ಆ ಬಹು ಸಮಯದ ಬರವನ್ನು ರಿಷಬ್ ಶೆಟ್ಟಿ ನೀಗಿಸಿದ್ದಾರೆ. ಅಂದಹಾಗೆ ನಟಿ ತಾರಾ ಅವರಿಗೆ ರಾಷ್ಟ್ರಪ್ರಶಸ್ತಿ ದೊರೆತಿದ್ದನ್ನು ಇಲ್ಲಿ ಸ್ಮರಿಸಬಹುದು.
ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾವನ್ನು ನಿರ್ದೇಶನ ಮಾಡಿ ನಟನೆಯನ್ನೂ ಮಾಡಿದ್ದರು. ಆ ಸಿನಿಮಾದಲ್ಲಿ ಬೇಜವಾಬ್ದಾರಿಯುತ, ಸಿಡುಕು ಸ್ವಭಾವದ, ತಮಾಷೆ ಸ್ವಭಾವದ ಕಾಡುಬೆಟ್ಟು ಶಿವನ ಪಾತ್ರದಲ್ಲಿ ನಟಿಸಿದ್ದಾರೆ. ಅದೇ ಸಿನಿಮಾದಲ್ಲಿ ದೈವದ ವೇಷಧಾರಿಯಾಗಿ ಅಂತಿಮ ದೃಶ್ಯಗಳಲ್ಲಿ ಗುಳಿಗ ಮೈಮೇಲೆ ಬಂದಾಗಿನ ಅವರ ಅದ್ಭುತ ನಟನೆ ಇವೆಲ್ಲವನ್ನೂ ಪರಿಗಣಿಸಿ ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಲಾಗದೆ. ಕಳೆದ ವರ್ಷ ರಾಷ್ಟ್ರಪ್ರಶಸ್ತಿಯಲ್ಲಿ ಪುಷ್ಪ ಸಿನಿಮಾದ ಅತ್ಯುತ್ತಮ ನಟನೆಗಾಗಿ ಅಲ್ಲು ಅರ್ಜುನ್ ಅವರಿಗೆ ನೀಡಲಾಗಿತ್ತು. ಈ ಬಾರಿ ರಿಷಬ್ ಶೆಟ್ಟಿ ಪಾಲಾಗಿದೆ.