ಶಿವಮೊಗ್ಗ: ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧ ರಕ್ತಕ್ರಾಂತಿಯ ಮಾತಾಡಿದ್ದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದೇಗೌಡ ಹೆಚ್.ಎಂ. ರವರು ಸ್ವದೂರು ನೀಡಿದ್ದು, ಈಶ್ವರಪ್ಪರ ವಿರುದ್ಧ ನವೆಂಬರ್ 14 ರಂದು 81/2024 ರಂತೆ, ಕಲಂ 196(1)(a), 299BNS ನಂತೆ ಪ್ರಕರಣ ದಾಖಲಾಗಿದೆ.
ನ.13 ರಂದು ಬೆಳಿಗ್ಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಕ್ಫ್ ಪ್ರಕರಣಗಳ ಬಗ್ಗೆ, ಅಂಬೇಡ್ಕರ್ ಇಸ್ಲಾಂ ಸೇರ್ಪಡೆ ಹೇಳಿಕೆ ಬಗ್ಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರ ಮೀಸಲಾತಿ ಬಗ್ಗೆ ಕಾಂಗ್ರೆಸ್ ಸ್ಪಂದಿಸಿ ಹಿಂದೂಸ್ಥಾನವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದರು.
ಅಲ್ಲದೇ, ಧಾರ್ಮಿಕ ಭಾವನೆಗಳು ಕೆರಳುವಂತೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿಯೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಈಶ್ವರಪ್ಪರವರ ಮೇಲೆ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.