ಮನೆ ರಾಜ್ಯ ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಶಿವಮೊಗ್ಗದ ರಾಗಿಗುಡ್ಡದಲ್ಲಿ  ಪರಿಸ್ಥಿತಿ ಉದ್ವಿಗ್ನ

ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಶಿವಮೊಗ್ಗದ ರಾಗಿಗುಡ್ಡದಲ್ಲಿ  ಪರಿಸ್ಥಿತಿ ಉದ್ವಿಗ್ನ

0

ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ರಾಗಿ ಗುಡ್ಡದಲ್ಲಿ ಕಿಡಿಗೇಡಿಗಳು ಮನೆ, ವಾಹನಗಳ ಮೇಲೆ  ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣವೇ  ಪೊಲೀಸರು ಅಲರ್ಟ್ ಆಗಿ, ಲಾಠಿ ಚಾರ್ಜ್​​ ನಡೆಸಿದರು.

ಲಾಠಿಚಾರ್ಚ್ ನಲ್ಲಿ ಸಿಕ್ಕ ಸಿಕ್ಕ ಮನೆಯ ಗಾಜುಗಳು, ಕಿಟಕಿ ಗ್ಲಾಸ್ ಗಳು ನುಚ್ಚು ನೂರಾಗಿವೆ. ಮಹಿಳೆ ಸೇರಿ 7 ಮಂದಿಗೆ ಪೊಲೀಸರ ಲಾಠಿಚಾರ್ಚ್ ನಲ್ಲಿ ಗಾಯಗಳಾಗಿವೆ.

ಗಲಭೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡುತ್ತಿದ್ದಾಗ ಸ್ಥಳೀಯರು, ಪೊಲೀಸರು, ಮಾಧ್ಯಮದವರಿಗೂ ಗಾಯಗಳಾಗಿದೆ. ಎಸ್​.ಪಿ. ಮಿಥುನ್​​ ಕುಮಾರ್​​​ ಮೇಲೂ ಕಲ್ಲೆಸೆತವಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಗಲಭೆಯಲ್ಲಿ  ಪೊಲೀಸರು  ಇದುವರೆಗೆ 10 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಶಿವಮೊಗ್ಗ ನಗರದಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದ್ದು ಬಿಗಿ ಪೊಲೀಸ್ ಬಂದೋಬಸ್ತ್​​​ ನೀಡಲಾಗಿದೆ.

ಘಟನೆ ವಿವರ: ಈದ್​ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ತಲ್ವಾರ್​ ಮಾದರಿ ಕಟೌಟ್ ವಿಚಾರಕ್ಕೆ ಗೊಂದಲ ಸೃಷ್ಟಿಯಾಗಿತ್ತು. ರಾಗಿಗುಡ್ಡ ಮುಖ್ಯರಸ್ತೆಯಲ್ಲಿ ಕಟೌಟ್ ಹಾಕಲಾಗಿದ್ದು ಜನರು ಶಿವಮೊಗ್ಗ ಹೊನ್ನಾಳಿ ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದರು. ತಕ್ಷಣವೇ  ಎಸ್ ​ಪಿ  ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದರು. ನಿಷೇಧಾಜ್ಞೆ ಜಾರಿ ಮಾಡಿ ಪರಿಸ್ಥಿತಿ ನಿಯಂತ್ರಿಸಲಾಗಿತ್ತು.

ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಟಿಪ್ಪುವಿನ ಕಟೌಟ್​ ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು. ಇದರಿಂದ ರೊಚ್ಚಿಗೆದ್ದ ರಾಗಿಗುಡ್ಡದ ಶಾಂತಿನಗರ ನಿವಾಸಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಮಹಾನಗರ ವ್ಯಾಪ್ತಿಯ ಎಲ್ಲ ವಾರ್ಡ್‌ ಗಳಿಗೆ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸದ್ಯ ಶಾಂತಿ ನಗರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಶಾಂತಿನಗರದಲ್ಲಿ ಹೆಚ್ಚುವರಿ ಪೊಲೀಸ್‌ ಬಲ ನಿಯೋಜನೆ ಮಾಡಲಾಗಿದೆ. ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಬೆಳ್ಳಂಬೆಳಗ್ಗೆ ತೆರೆದ ಕೆಲವು ಅಂಗಡಿಗಳನ್ನು ಪೊಲೀಸರು ಬಂದ್‌ ಮಾಡಿಸಿದರು. ಶಾಲಾ ಬಸ್ಸುಗಳನ್ನು ಮರಳಿ ಕಳಿಸಲಾಯಿತು.

ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರು, ಆಸ್ತಿಪಾಸ್ತಿ ಹಾನಿಗೊಳಗಾದವರಿಂದ ದೂರು ಸ್ವೀಕಾರ ಮಾಡಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದು, ಕಲ್ಲು ತೂರಾಟದಲ್ಲಿ ಕೆಲವು ಪೊಲೀಸರಿಗೂ ಗಾಯವಾಗಿದೆ.

ರಾತ್ರಿ ಕಲ್ಲು ತೂರಾಟ ನಡೆದ ಘಟನಾ ಸ್ಥಳವನ್ನು ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಪರಿಶೀಲಿಸಿದರು. ಪರಿಸ್ಥಿತಿಯ ಬಗ್ಗೆ ಡಿಸಿ ಡಾ.ಆರ್.ಸೆಲ್ವಮಣಿ ವಿವರ ಪಡೆದಿದ್ದಾರೆ.

ಹಿಂದಿನ ಲೇಖನಗಾಂಧಿ ಜಯಂತಿ ಅಂಗವಾಗಿ “ಪ್ಲಾಸ್ಟಿಕ್ ಮುಕ್ತ ಗಂಗೋತ್ರಿ”  ಹೆಸರಿನಲ್ಲಿ ಶ್ರಮದಾನ
ಮುಂದಿನ ಲೇಖನಮಂಗಳೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ