ಮನೆ ರಾಷ್ಟ್ರೀಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ 2 ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ 2 ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ

0

ನವದೆಹಲಿ (New Delhi)- ಸ್ಥಳೀಯ ಸಂಸ್ಥೆಗಳ ಅಧಿಕಾರ ಅವಧಿ ಪೂರ್ಣಗೊಂಡ ನಂತರ ನಿರ್ವಾತ ಸೃಷ್ಟಿಯಾಗಲು ಬಿಡದೇ ಚುನಾವಣೆ ನಡೆಸುವುದು ರಾಜ್ಯಗಳ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ’ ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.

ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ,ಮೂರು ಹಂತದ ಪರಿಶೀಲನೆ ಇಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಆದರೆ, ಸ್ಥಳೀಯ ಸಂಸ್ಥೆಗಳ ಅಧಿಕಾರ ಅವಧಿ ಪೂರ್ಣಗೊಂಡ ನಂತರ ನಿರ್ವಾತ ಸೃಷ್ಟಿಯಾಗಲು ಬಿಡದೇ ಚುನಾವಣೆ ನಡೆಸುವುದು ರಾಜ್ಯಗಳ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ ಎಂದಿದೆ.

ಅಲ್ಲದೆ, ರಾಜ್ಯದ 23,263 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಎರಡು ವಾರಗಳ ಒಳಗಾಗಿ ಅಧಿಸೂಚನೆ ಹೊರಡಿಸುವಂತೆ ಮಧ್ಯಪ್ರದೇಶದ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್‌ನ ಈ ಆದೇಶ ಹಾಗೂ ನಿರ್ದೇಶನಗಳು ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಲ್ಲ. ಎಲ್ಲ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೂ ಹಾಗೂ ಸಂಬಂಧಿಸಿದ ಚುನಾವಣಾ ಆಯೋಗಗಳಿಗೆ ಅನ್ವಯ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಕೆಲ ಅರ್ಜಿಗಳ ವಿಚಾರಣೆ ಬಾಕಿ ಇದೆ. ಕೆಲ ಅರ್ಜಿಗಳಿಗೆ ಸಂಬಂಧಿಸಿ ಮಧ್ಯಂತರ ಆದೇಶಗಳನ್ನು ಹೊರಡಿಸಲಾಗಿದ್ದು, ಇವು ಚುನಾವಣೆ ಅಧಿಸೂಚನೆ ಪ್ರಕಟಿಸಲು ಅಡ್ಡಿಯಾಗಬಹುದು ಎಂಬುದಾಗಿ ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ವಿಷಯವಾಗಿ ಸುಪ್ರೀಂಕೋರ್ಟ್‌ ನೀಡುವ ಆದೇಶ ಮತ್ತು ನಿರ್ದೇಶನಗಳನ್ನು ರಾಜ್ಯ ಚುನಾವಣಾ ಆಯೋಗ ಪಾಲಿಸಬೇಕು. ಈ ವಿಷಯವಾಗಿ ಹೈಕೋರ್ಟ್‌ ಅಥವಾ ಸಿವಿಲ್‌ ನ್ಯಾಯಾಲಯ ನೀಡುವ ನೀಡುವ ಆದೇಶಗಳಿಂದ ಪ್ರಭಾವಿತವಾಗಬಾರದು ಎಂದು ಸೂಚಿಸಿತು.

ಒಂದು ವೇಳೆ ಮಧ್ಯಪ್ರದೇಶ ಹೈಕೋರ್ಟ್‌ ಅಥವಾ ಸಿವಿಲ್‌ ಕೋರ್ಟ್‌ ಯಾವುದಾದರೂ ಆದೇಶ ನೀಡಿದಲ್ಲಿ ಅಥವಾ ನೀಡುವುದಿದ್ದರೆ ಹಾಗೂ ಅದು ಸುಪ್ರೀಂಕೋರ್ಟ್‌ನ ನಿರ್ದೇಶನಕ್ಕೆ ವಿರುದ್ಧವಾಗಿದ್ದಲ್ಲಿ, ಅಂಥ ಆದೇಶವು ವಜಾಗೊಂಡಿದೆ ಎಂಬುದಾಗಿ ಪರಿಭಾವಿಸಬೇಕು. ಅಲ್ಲದೇ, ಸುಪ್ರೀಂಕೋರ್ಟ್‌ನ ಪೂರ್ವಾನುಮತಿ ಇಲ್ಲದೇ ಯಾವುದೇ ಕ್ರಮ ಕೈಗೊಳ್ಳಬಾರದು ಎಂದೂ ನ್ಯಾಯಪೀಠ ಸೂಚಿಸಿತು.

ನಿಖರವಾದ ಅಂಕಿಅಂಶಗಳ ಆಧಾರದಲ್ಲಿ ಮೂರು ಹಂತದ ಪರಿಶೀಲನೆ ನಡೆಸಿ, ಆಯಾ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಖಾತರಿಪಡಿಸಿದ ಬಳಿಕವೇ ರಾಜಕೀಯ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ 2010ರಲ್ಲಿ ತೀರ್ಪು ನೀಡಿತ್ತು. 2021ರ ಮಾರ್ಚ್‌ನಲ್ಲೂ ಸುಪ್ರೀಂಕೋರ್ಟ್‌ ಇದನ್ನು ಪುನರುಚ್ಚರಿಸಿತ್ತು.

ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಎರಡು ವಾರಗಳ ಒಳಗಾಗಿ ಅಧಿಸೂಚನೆ ಹೊರಡಿಸುವಂತೆ ಮಹಾರಾಷ್ಟ್ರದ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿ ಮೇ 4ರಂದು ಸುಪ್ರೀಂಕೋರ್ಟ್‌ ಆದೇಶಿಸಿತ್ತು.

ಹಿಂದಿನ ಲೇಖನರಾಜ್ಯದಲ್ಲಿ 129 ಮಂದಿಗೆ ಕೊರೊನಾ ಸೋಂಕು
ಮುಂದಿನ ಲೇಖನಯತ್ನಾಳ್‌ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ವರದಿ: ನಳಿನ್‌ ಕುಮಾರ್‌ ಕಟೀಲ್‌