ಮನೆ ರಾಷ್ಟ್ರೀಯ ಎಸಿಬಿ ಕುರಿತು ಹೈಕೋರ್ಟ್‌ ಆರೋಪ, ಆದೇಶಗಳಿಗೆ ತಡೆನೀಡಿದ ಸುಪ್ರೀಂ ಕೋರ್ಟ್‌

ಎಸಿಬಿ ಕುರಿತು ಹೈಕೋರ್ಟ್‌ ಆರೋಪ, ಆದೇಶಗಳಿಗೆ ತಡೆನೀಡಿದ ಸುಪ್ರೀಂ ಕೋರ್ಟ್‌

0

ನವದೆಹಲಿ (New Delhi): ರಾಜ್ಯದ ಭ್ರಷ್ಟಾಚಾರ ನಿಗ್ರಹ ಪಡೆ (ಎಸಿಬಿ) ಕುರಿತಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆರೋಪ, ಆದೇಶಗಳಿಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಸೀಲ್ದಾರ್‌ ಪಿ.ಎಸ್‌. ಮಹೇಶ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್‌ ಅವರ ಏಕಸದಸ್ಯ ಪೀಠವು ‘ಎಸಿಬಿ ಭ್ರಷ್ಟರ ಕೂಪವಾಗಿದೆ. ಅದೊಂದು ಕಲೆಕ್ಷನ್‌ ಸೆಂಟರ್‌ ಆಗಿದೆ. ಅದರ ಎಡಿಜಿಪಿ ‘ಕಳಂಕಿತ ಅಧಿಕಾರಿ’ಯಾಗಿದ್ದಾರೆ’ ಎಂದು ಕಿಡಿಕಾರಿತ್ತು.

ನ್ಯಾ. ಸಂದೇಶ್‌ ಅವರು ಮಾಡಿದ್ದ ಈ ಟೀಕೆಗಳನ್ನು ಪ್ರಶ್ನಿಸಿ ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣಾ ನ್ಯಾಯಾಲಯಗಳಿಗೆ ಎಸಿಬಿ ಸಲ್ಲಿಸಿರುವ ಬಿ ರಿಪೋರ್ಟ್‌ ಹಾಗೂ ಎಡಿಜಿಪಿ ಸೇರಿದಂತೆ ಹಿರಿಯ ಅಧಿಕಾರಿಗಳ ಸೇವಾ ದಾಖಲೆ ಸಲ್ಲಿಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ. ಅಲ್ಲದೆ, ಹೈಕೋರ್ಟ್‌ ನೀಡಿರುವ ಆದೇಶಗಳು ಜಾಮೀನು ಅರ್ಜಿಯ ವ್ಯಾಪ್ತಿಯ ದೃಷ್ಟಿಯಿಂದ ಅಪ್ರಸ್ತುತ ಎನಿಸಿವೆ ಎಂದೂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಬೇರೆ ಪೀಠಕ್ಕೆ ವರ್ಗಾಯಿಸಬೇಕೆಂಬ ಹಾಗೂ ವಿಚಾರಣೆ ವೇಳೆ ಹೈಕೋರ್ಟ್‌ ಪೀಠವು ಮಾಡಿದ್ದ ಟೀಕೆಗಳನ್ನು ಆದೇಶದಿಂದ ತೆಗೆದು ಹಾಕಬೇಕು ಎಂಬ ಮನವಿಯನ್ನು ಸುಪ್ರೀಂ ನ್ಯಾಯಪೀಠ ತಿರಸ್ಕರಿಸಿದೆ. ಇದೇ ವೇಳೆ, ಆರೋಪಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಪರಿಗಣಿಸಿ ಮೂರು ವಾರಗಳ ನಂತರ ಲಿಸ್ಟಿಂಗ್‌ಗೆ ಸೇರಿಸಬೇಕು ಎಂದೂ ಸೂಚಿಸಿದೆ.

ಮಹೇಶ್‌ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಅವರು ತಮ್ಮ ಕಾರ್ಯವೈಖರಿ ವಿರುದ್ಧ ಟೀಕಿಸಿದ್ದನ್ನು ಪ್ರಶ್ನಿಸಿ ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೇ ಪ್ರಕರಣ ಸಂಬಂಧ ಕರ್ನಾಟಕ ಸರ್ಕಾರವೂ ಸುಪ್ರೀಂ ಮೊರೆ ಹೋಗಿತ್ತು. ಅಲ್ಲದೆ, ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಕ್ಕೊಳಗಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಅವರು ಸಲ್ಲಿಸಿದ್ದ ಮೇಲ್ಮನವಿ ಒಟ್ಟು ಮೂರು ಅರ್ಜಿಗಳ ವಿಚಾರಣೆಯನ್ನು ನಡೆಸಿತು.

ಸೀಮಂತ್‌ ಕುಮಾರ್‌ ಅವರ ಪರವಾಗಿ ಹಿರಿಯ ವಕೀಲ ಮುಕುಲ್‌ ರೋಹಟಗಿ, ಜೆ. ಮಂಜುನಾಥ್‌ ಅವರ ಪರ ಹಿರಿಯ ವಕೀಲ ಎಸ್‌.ನಾಗಮುತ್ತು ವಾದ ಮಂಡಿಸಿದರು.

ಹಿಂದಿನ ಲೇಖನಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ
ಮುಂದಿನ ಲೇಖನಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿದೆ ಉದ್ಯೋಗ