ಮಂಡ್ಯ : ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿರುವ ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ವಿರುದ್ಧ ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಸೂಚಿಸಿದರು. ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿಂದು ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ) ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಬೇಕು ಎಂದರು.
ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಗದಂತೆ ಬಸರಾಳು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರನ್ನು ನೇಮಿಸಬೇಕು ಹಾಗೂ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿ, ಅಂಬುಲೆನ್ಸ್ ಸೇವೆಯನ್ನ 24×7 ಕಲ್ಪಿಸುವುದಾಗಿ ಭರವಸೆ ನೀಡಿದರು.
ಅಲ್ಲದೇ ಬೇಸಿಗೆ ರಜೆ ಇರುವ ಕಾರಣ, ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಿ ಮಕ್ಕಳನ್ನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಕಾರ್ಯಕ್ರಮಗಳನ್ನ ರೂಪಿಸಬೇಕು ಹಾಗೂ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿಗಳನ್ನ ಹೆಚ್ಚಿಸುವಂತೆ ಕಾರ್ಯಕ್ರಮಗಳನ್ನ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯ ವಿಕಾಸ ಯೋಜನೆಯಡಿಗೆ 2025 -26 ನೇ ಸಾಲಿನ ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡುವಂತೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳ ದಾಖಲೆ ಪರಿಶೀಲಿಸಿ ಶಾಲೆಗಳ ಖಾತೆ ಮಾಡಿಸುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.















