ಮನೆ ರಾಜಕೀಯ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ: ಹೆಚ್‌ಡಿಕೆ ಭರವಸೆ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ: ಹೆಚ್‌ಡಿಕೆ ಭರವಸೆ

0

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಮುಖಂಡರು ಸಲ್ಲಿಸಿದ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು; ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.

ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದುಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ ಅಸಂಖ್ಯಾತ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸರಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರನ್ನು ನಿರ್ಲಕ್ಷ್ಯ ಮಾಡುವುದು ಬೇಡ. ಅವರ ಗೌರವ ಧನ ಹೆಚ್ಚಳ ಮಾಡುವುದರ ಜತೆಗೆ, ಎನ್‌ ಪಿ ಎಸ್‌ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕೆ ಅಗತ್ಯವಾದ 339.49 ಲಕ್ಷ ರೂ.ಗಳನ್ನು ಬಜೆಟ್‌ʼನಲ್ಲಿ ತೆಗೆದಿರಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯ ಮಾಡಿದರು.

ಸಮಿತಿಯ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಮತ್ತಿತರರು ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಹಿಂದಿನ ಲೇಖನಅಪರಾಧ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಆರೋಪಿ ಅನರ್ಹನಾಗುವುದು ಯಾವಾಗ? ಇಲ್ಲಿದೆ ಮಾಹಿತಿ
ಮುಂದಿನ ಲೇಖನದೇಶದಲ್ಲಿ ಇಳಿಕೆ ಕಂಡ ಕೊರೊನಾ: ಇಂದು 2.09 ಲಕ್ಷ ಹೊಸ ಕೇಸ್ ಪತ್ತೆ