ಮನೆ ಅಪರಾಧ ಟೆಲಿಗ್ರಾಂ ಮೂಲಕ ಶಿಕ್ಷಕಿಯನ್ನು ಬೆದರಿಸಿ 1 ಲಕ್ಷ ರೂ ವಸೂಲಿ: ಆರೋಪಿಯ ಬಂಧನ

ಟೆಲಿಗ್ರಾಂ ಮೂಲಕ ಶಿಕ್ಷಕಿಯನ್ನು ಬೆದರಿಸಿ 1 ಲಕ್ಷ ರೂ ವಸೂಲಿ: ಆರೋಪಿಯ ಬಂಧನ

0

ಮಂಗಳೂರು(ದಕ್ಷಿಣ ಕನ್ನಡ): ಟೆಲಿಗ್ರಾಂ ಮೂಲಕ ಮೆಸೇಜ್ ಮಾಡಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ.

ಬೆಳ್ತಂಗಡಿ ತಾಲೂಕಿನ ಶಾಲಾ ಶಿಕ್ಷಕಿ ಜ್ಯೋತಿ ಎಂಬುವವರಿಗೆ ಮೂರು ಲಕ್ಷ ರೂಪಾಯಿ ನೀಡುವಂತೆ ಟೆಲಿಗ್ರಾಂ ನಕಲಿ ಖಾತೆಯ ಮೂಲಕ ವ್ಯಕ್ತಿಯೋರ್ವ ಬೇಡಿಕೆ ಇಟ್ಟು ಹಣ ನೀಡದಿದ್ದರೆ ಪತಿಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಜ್ಯೋತಿ ವೇಣೂರು ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯಾ ಜೆ. ನೇತೃತ್ವದ ತಂಡ ಆರೋಪಿಯ ಪತ್ತೆ ಕಾರ್ಯಾಚರಣೆಗಿಳಿದಿತ್ತು. ಪೊಲೀಸರ ಸೂಚನೆಯಂತೆ ಜ್ಯೋತಿ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆರೋಪಿಯನ್ನು ಟೆಲಿಗ್ರಾಂ ಮೆಸೇಜ್ ಕಳುಹಿಸಿ ಒಪ್ಪಿಸಿದ್ದರು. ಅದರಂತೆ ಆರೋಪಿ ಅಳದಂಗಡಿ ಕೆದ್ದು ಸಮೀಪ ಹಣ ಎಸೆದು ಹೋಗುವಂತೆ ಸೂಚಿಸಿದ್ದ. ಬಳಿಕ ಅಲ್ಲಿ ಬೇಡ ಎಂದು ಮೆಸೇಜ್ ರವಾನಿಸಿ ಬೇರೊಂದು ಸ್ಥಳ ಸೂಚಿಸಿದ್ದ. ಹೀಗೆ 3-4 ಬಾರಿ ಸ್ಥಳವನ್ನು ಬದಲಾಯಿಸುತ್ತಾ ಮೆಸೇಜ್ ಮಾಡುತ್ತಿದ್ದ. ಕೊನೆಗೆ ಆರೋಪಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಎಸೆದು ಹೋಗುವಂತೆ ಸೂಚಿಸಿದ್ದ. ಅದರಂತೆ ಜ್ಯೋತಿ ಹಣದ ಕಟ್ಟನ್ನು ಎಸೆದು ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಹಣವನ್ನು ಹೆಕ್ಕಿಕೊಳ್ಳುತ್ತಿದ್ದಂತೆ ಮೊದಲೇ ಕಾದು ಕುಳಿತಿದ್ದ ಪೊಲೀಸರು ಆತನನ್ನು ಹಿಡಿಯಲು ಯತ್ನಿಸಿದ್ದಾರೆ.

ಆದರೆ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ. ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನನ್ನು ಗುಂಡೇರಿ ಸಮೀಪ ಬಂಧಿಸಿದ್ದಾರೆ.

ಆರೋಪಿಯಿಂದ ಒಂದು ಲಕ್ಷ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಹಿಂದಿನ ಲೇಖನಮದುವೆಯ ನಂತರ ಹೆಣ್ಣುಮಕ್ಕಳಿಗೆ ಕೋಪ ಹೆಚ್ಚು, ಯಾಕೆ ಗೊತ್ತಾ ?
ಮುಂದಿನ ಲೇಖನಮಳೆಗಾಲದ ಕೆಮ್ಮು, ಶೀತಕ್ಕೆ ಇದು ತುಂಬಾ ಉತ್ತಮ ಔಷಧ