ಮನೆ ಕಾನೂನು ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಕಡ್ಡಾಯಗೊಳಿಸಲು ಮುಂದಾದ ರಾಜ್ಯ ಸರ್ಕಾರ

ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಕಡ್ಡಾಯಗೊಳಿಸಲು ಮುಂದಾದ ರಾಜ್ಯ ಸರ್ಕಾರ

0

ಬೆಂಗಳೂರು: ಒಂಬತ್ತು ತಿಂಗಳ ಮಗುವಿನಿಂದ ತೊಡಗಿ ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯುವಾಗ ಶಿಶು ಸುರಕ್ಷಾ ಕವಚ ಅಥವಾ ಸುರಕ್ಷತಾ ಬೆಲ್ಟ್ (ಸೇಫ್ಟಿ ಹಾರ್ನೆಸ್ ಬೆಲ್ಟ್) ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

Join Our Whatsapp Group

ಕೇಂದ್ರ ಸರ್ಕಾರ ಈಗಾಗಲೇ ಈ ನಿಯಮವನ್ನು ಕಡ್ಡಾಯಗೊಳಿಸಿದ್ದರೂ, ಕರ್ನಾಟಕದಲ್ಲಿ ಇದು ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಈ ಕುರಿತು ಈಗಾಗಲೇ ಜಾಗೃತಿ ಅಭಿಯಾನ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.

ಸೇಫ್ಟಿ ಹಾರ್ನೆಸ್ ಬೆಲ್ಟ್ ಇಲ್ಲದೆ ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಅವರು ರಸ್ತೆಗೆ ಬೀಳುವ ಅಪಾಯ ಹೆಚ್ಚಿದೆ. ಅನೇಕ ಸವಾರರು ತಮ್ಮ ಮಕ್ಕಳನ್ನು ಬೈಕ್‌ಗಳ ಪೆಟ್ರೋಲ್ ಟ್ಯಾಂಕ್‌ ಗಳ ಮೇಲೆ ಕೂರಿಸುತ್ತಾರೆ ಅಥವಾ ಫುಟ್‌ರೆಸ್ಟ್ ಪ್ರದೇಶದಲ್ಲಿ ನಿಲ್ಲಲು ಅವಕಾಶ ನೀಡುತ್ತಾರೆ. ಅಂತಹ ಸಂದರ್ಭಗಳಲ್ಲಿ, ಮಕ್ಕಳು ತಮ್ಮ ಸಮತೋಲನವನ್ನು ಕಳೆದುಕೊಳ್ಳಬಹುದು ಮತ್ತು ಬೀಳಬಹುದು. ವಿಶೇಷವಾಗಿ ಹಠಾತ್ ಬ್ರೇಕ್ ಹಾಕಿದಾಗ ಇಂಥ ಘಟನೆಗಳಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಕೆಲವು ಸಂದರ್ಭಗಳಲ್ಲಿ, ಸವಾರಿ ಮಾಡುವಾಗ ಮಕ್ಕಳು ನಿದ್ರಿಸಬಹುದು. ಅನೇಕ ಸವಾರರು ತಮ್ಮ ಶಿಶುಗಳನ್ನು ಒಂದು ಕೈಯಿಂದ ಹಿಡಿದುಕೊಂಡು ಮತ್ತೊಂದು ಕೈಯಿಂದ ವಾಹನವನ್ನು ಚಲಾಯಿಸುತ್ತಾರೆ, ಇದು ಮಗುವಿನ ಸುರಕ್ಷತೆಗೆ ಮತ್ತಷ್ಟು ಅಪಾಯಕರ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಅಂತಹ ಸಂದರ್ಭಗಳಲ್ಲಿ ಸುರಕ್ಷತಾ ಕವಚ ಧರಿಸಿದ್ದರೆ ಮಕ್ಕಳಿಗೆ ರಕ್ಷಣೆ ದೊರೆಯುತ್ತದೆ.

ಕರ್ನಾಟಕದಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಈಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ (ಡಿಸಿ) ಕಚೇರಿಗಳಲ್ಲಿ ಕೆಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಎಲ್ಲಾ ಡಿಸಿ ಕಚೇರಿಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಶಿಕ್ಷಣ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳಿಗೂ ಜಾಗೃತಿ ಅಭಿಯಾನಗಳನ್ನು ವಿಸ್ತರಿಸುವ ಯೋಜನೆಗಳು ನಡೆಯುತ್ತಿವೆ. ಈ ಕಾರ್ಯಕ್ರಮಗಳು ಪೂರ್ಣಗೊಂಡ ಬಳಿಕ ನಿಯಮ ಉಲ್ಲಂಘಿಸುವ ಸವಾರರಿಗೆ ದಂಡ ವಿಧಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲೇನಿದೆ?

ಕೇಂದ್ರ ಮೋಟಾರು ವಾಹನ ನಿಯಮಾವಳಿ 1989ರ ನಿಯಮ 138 (7) ಅನ್ವಯ 9 ತಿಂಗಳು ಮೇಲ್ಪಟ್ಟ ಹಾಗೂ 4 ವರ್ಷದ ಒಳಗಿನ ಎಲ್ಲ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಹಾಕಲೇಬೇಕು.

ನಿಗದಿಯಂತೆ ಈ ನಿಯಮನದ ಅನುಷ್ಠಾನ ಕರ್ನಾಟಕದಲ್ಲಿ ಈಗಾಗಲೇ ಆಗಬೇಕಿತ್ತು. ಜುಲೈ ಮೊದಲ ವಾರ ಪೋಷಕರು ಮತ್ತು ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುತ್ತೇವೆ. ಎರಡನೆಯ ವಾರದಿಂದ ವಾಹನ ತಪಾಸಣೆ ಮಾಡಿ ದಂಡ ಹಾಕಲು ಶುರು ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ ಜೂನ್​ನಲ್ಲಿ ತಿಳಿಸಿದ್ದರು. ಆದರೆ, ನಂತರ ಪರಿಣಾಮಕಾರಿಯಾಗಿ ಅನುಷ್ಠಾನವಾಗಿರಲಿಲ್ಲ.