ಮನೆ ರಾಜಕೀಯ ರಾಜ್ಯದಲ್ಲಿ ೬೫ ಸಾವಿರ ಕೋಟಿ ಬಂಡವಾಳ ಹೂಡಲು ಹಲವು ಕಂಪನಿಗಳು ಬದ್ಧತೆ ತೋರಿವೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ೬೫ ಸಾವಿರ ಕೋಟಿ ಬಂಡವಾಳ ಹೂಡಲು ಹಲವು ಕಂಪನಿಗಳು ಬದ್ಧತೆ ತೋರಿವೆ: ಸಿಎಂ ಬೊಮ್ಮಾಯಿ

0

ಬೆಂಗಳೂರು: ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು  ಕಂಪನಿಗಳು ಮುಂದೆ ಬಂದಿವೆ.  ಅಂದಾಜು  ೬೫ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ.  ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.‌

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿದಂತೆ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.

ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಪೂರಕ ಪರಿಸರ, ನೀತಿ ನಿಯಮಗಳು,  ತಂತ್ರಜ್ಞಾನ ಆಧಾರ, ಕೌಶಲ್ಯಯುತ ಮಾನವಸಂಪನ್ಮೂಲ, ಆರ್ ಎಂಡ್ ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ ಪ್ರೋತ್ಸಾಹಕಗಳು, ಭೂಮಿಯ ಲಭ್ಯತೆಗಳಿಂದಾಗಿ ಬಂಡವಾಳ ಹೂಡಿಕೆ ಸಂಸ್ಥೆಗಳಿಗೆ ಕರ್ನಾಟಕದ ರಾಜ್ಯದ ಮೇಲೆ ವಿಶ್ವಾಸವನ್ನು ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹಲವು ಜಾಗತಿಕ ಉದ್ದಿಮೆದಾರರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಕರ್ನಾಟಕ ಬಂಡವಾಳ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ.  ಕರ್ನಾಟಕದಲ್ಲಿ ಒಟ್ಟು 65 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ವಿಶ್ವ ಪ್ರಮುಖ ಸಂಸ್ಥೆಗಳು ಬದ್ಧತೆ ತೋರಿದ್ದು, ಸುಮಾರು 25 ಕಂಪನಿಗಳೊಂದಿಗೆ ಚರ್ಚಿಸಲಾಗಿದೆ. ಭಾರತ ದೇಶವನ್ನು ಹೊಸ ಆರ್ಥಿಕ ಶಕ್ತಿಯಾಗಿ ವಿಶ್ವ ಎದುರುನೋಡುತ್ತಿದೆ. ಕರ್ನಾಟಕ ರಾಜ್ಯದ ಎಲ್ಲ ರಂಗಗಳಲ್ಲಿ ಹೂಡಿಕೆದಾರರು ಆಸಕ್ತಿ ತೋರಿದರು. ಬಂಡವಾಳ ಹೂಡಿಕೆಯ ಜೊತೆಗೆ ವಿಸ್ತರಣಾ ಕಾರ್ಯಕ್ಕೂ ಉತ್ಸುಕತೆ ತೋರಿದರು. ಹೈಡ್ರೋ ಪವರ್, ಏರೋಸ್ಪೇಸ್, ನವೀಕರಿಸಬಹುದಾದ ಇಂಧನ ಸೇರಿದಂತೆ ಪ್ರಮುಖ ಕ್ಷೇತ್ರದ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಬಂಡವಾಳ ಹೂಡಿಕೆಯಲ್ಲಿ ಆಸಕ್ತಿ ತೋರಿದರು. ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು ಎಂದರು.

ರೆನ್ಯೂ ಪವರ್ ಪ್ರೈ.ಲಿ.  ಕಂಪೆನಿಯು 50 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 30 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು.

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು,4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.   10 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು.

ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಎನರ್ಜಿ, ಸೀಮೆನ್ಸ್ , ಅಬ್ ಇನ್ಬೇವ್, ದಸ್ಸಾಲ್ಟ್ ಸಿಸ್ಟಂ , ನಸ್ಟ್ಲೆ , ಆರ್ಸೆಲಾರ್ ಮಿತ್ತಲ್ ಸಂಸ್ಥೆ ಭಾರ್ತಿ ಎಂಟರ್ ಪ್ರೈಸಸ್, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡುವ ಭರವಸೆ ನೀಡಿವೆ ಎಂದರು.

ಇದಲ್ಲದೆ ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸ್ ನ್ ಕಂಟ್ರೋಲ್ಸ್, ಹನಿವೆಲ್, ಐಬಿಎಂ, ಐಕಿಯ ಸ್ಟೋರ್ಸ್, ಪೇಪಾಲ್, ಆಕ್ಸಿಸ್  ಬ್ಯಾಂಕ್ ಸಂಸ್ಥೆಗಳು ರಾಜ್ಯದ ವಿವಿಧ ವಲಯಗಳಲ್ಲಿ ಹೂಡಿಕೆ ಅವಕಾಶ ಬಗ್ಗೆ ಆಸಕ್ತಿ ತೋರಿರುವುದಾಗಿ ತಿಳಿಸಿದರು.

ಕರ್ನಾಟಕ ಸರ್ಕಾರ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಹಮ್ಮಿಕೊಂಡಿರುವ ಯೋಜನೆಯಂತೆ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲಸೌಲಭ್ಯ ನೀಡಲು  ಆಕ್ಸಿಸ್ ಬ್ಯಾಂಕ್ ಸಂಸ್ಥೆಗೆ ಆ್ಯಂಕರ್ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು.

ಹಿಂದಿನ ಲೇಖನಪರಿಷತ್‌ ಚುನಾವಣೆ: 7 ಅಭ್ಯರ್ಥಿಗಳು ಅವಿರೋಧ ಆಯ್ಕೆ
ಮುಂದಿನ ಲೇಖನರೇರಾ ಕಾಯಿದೆ ಅಡಿ ಮೇಲ್ಮನವಿ ನ್ಯಾಯಮಂಡಳಿಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸುವ ಅಧಿಕಾರವಿಲ್ಲ: ದೆಹಲಿ ಹೈಕೋರ್ಟ್