ರಾಜ್ಯದಲ್ಲಿ ಬೇಸಿಗೆಯ ಬಿಸಿಲಿಗೆ ಜನರು ಹೈರಾಣು ಆಗಿದ್ದು, ಇಂದು ಸಂಜೆ ಮತ್ತು ನಾಳೆ ವರುಣದೇವ ತಂಪೆರೆಯಲಿದ್ದಾನೆ. ಇಂದು ಮತ್ತು ನಾಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳಿವೆ. ಈಗಾಗಲೇ ಈ ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ.
ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಹಾಸನದಲ್ಲಿ ಮಳೆಯ ಆರ್ಭಟ ಹೆಚ್ಚರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಇನ್ನೂ ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡಿನ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೀನುಗಾರರಿಗೂ ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗಿದೆ.
ಇತ್ತ ಉತ್ತರ ಕರ್ನಾಟಕ ಭಾಗದಲ್ಲಿಯೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಮಳೆ ಆರಂಭಕ್ಕೂ ಮುನ್ನ ಭಯಂಕರ ಗಾಳಿ ಬೀಸುತ್ತಿದೆ.
ಕಳೆದ ಒಂದೂವರೆ ತಿಂಗಳಿನಿಂದ ಬಿಸಿಲಿಗೆ ಸುಸ್ತಾಗಿದ್ದ ಜನತೆ ಮಳೆಯಿಂದ ಕೂಲ್ ಕೂಲ್ ಆಗಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ ತುಂತುರು ಮಳೆಯಾಗಿರುವ ವರದಿಗಳು ಬಂದಿವೆ.
ಕಳೆದ ಒಂದು ವಾರದಿಂದ ದೇಶದ ಎಲ್ಲ ರಾಜ್ಯಗಳಲ್ಲಿ ಮಳೆ ಆರಂಭವಾಗಿದೆ. ಇದೇ ರೀತಿ ಮುಂದಿನ ದಿನ ಮಳೆಯಾಗುವ ಸಾಧ್ಯತೆಗಳಿವೆ. ಮಳೆಯ ಜೊತೆ ವೇಗವಾಗಿ ಗಾಳಿ ಬೀಸಲಿದೆ.
ಬಲವಾದ ಮತ್ತು ಅತಿ ತೇವಾಂಶವುಳ್ಳ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ರಾಜ್ಯಗಳತ್ತ ಚಲಿಸುತ್ತಿವೆ. ಹಾಗಾಗಿ ಈಶಾನ್ಯ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಲಿದೆ.