ಮನೆ ದೇಶ ಬಿಡಿಎ ಆಯುಕ್ತ ಎಂ.ಬಿ.ರಾಜೇಶ ಗೌಡರನ್ನು ವರ್ಗಾವಣೆ ಮಾಡಿ: ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

ಬಿಡಿಎ ಆಯುಕ್ತ ಎಂ.ಬಿ.ರಾಜೇಶ ಗೌಡರನ್ನು ವರ್ಗಾವಣೆ ಮಾಡಿ: ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

0

ನವದೆಹಲಿ (New Delhi): ಕೋರ್ಟ್‌ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಎಂ.ಬಿ.ರಾಜೇಶ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡು, ಅವರನ್ನು ಪ್ರಾಧಿಕಾರದಿಂದ ವರ್ಗಾವಣೆ ಮಾಡಬೇಕು ಎಂದೂ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್‌ 2021ರ ಅಕ್ಟೋಬರ್‌ 29ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಬಿಡಿಎ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನ್ಯಾಯಮೂರ್ತಿಗಳಾದ ಎಸ್‌.ಅಬ್ದುಲ್‌ ನಜೀರ್ ಹಾಗೂ ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಡಾ.ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠವು ಬಿಡಿಎ ಅಧಿಕಾರಿಗಳ ಧೋರಣೆಗೆ ಕಿಡಿಕಾರಿತು.

ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಬಹು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕೆ ರಾಜೇಶ ಗೌಡ ಅವರು ವರ್ಗಾವಣೆ ಶಿಕ್ಷೆ ಅನುಭವಿಸುವಂತಾಗಿದೆ.

ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಪರ್ಯಾಯ ನಿವೇಶನಗಳ ಹಂಚಿಕೆಯನ್ನು ನಾವು ನಿರ್ಬಂಧಿಸಿದ್ದೇವೆ. ಆಯುಕ್ತರು ನಮ್ಮ ಆದೇಶವನ್ನು ಉಲ್ಲಂಘಿಸಿದ್ದಾರೆ ಹಾಗೂ ಪ್ರಾಧಿಕಾರಕ್ಕೆ ಭಾರಿ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಆರ್‌ಎಂವಿ (2ನೇ ಹಂತ ಎಕ್ಸ್‌ಟೆನ್ಶನ್‌) ಬಡಾವಣೆಯಲ್ಲಿ 9 ಕೋಟಿ ರೂ. ನಿಂದ 10 ಕೋಟಿ ರೂ. ಮೌಲ್ಯದ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ಮರು ಸ್ವಾಧೀನ ಪಡೆದಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ 2021ರ ಅಕ್ಟೋಬರ್‌ 29ರಂದು ಆದೇಶಿಸಿತ್ತು. ಆದರೆ, ಪ್ರಾಧಿಕಾರವು ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ನಾಲ್ವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿತ್ತು. ಬಳಿಕ ಮಧ್ಯಂತರ ಅರ್ಜಿ ಸಲ್ಲಿಸಿ, ತನ್ನ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿತ್ತು.

ಬಿಡಿಎ ಪರ ವಕೀಲರು ನ್ಯಾಯಾಲಯದ ಕ್ಷಮೆ ಕೋರಿದರು. ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡುವ ಮೊದಲು ಆದೇಶ ಮಾರ್ಪಾಡು ಮಾಡಬೇಕು ಎಂಬುದಾಗಿ ಬಿಡಿಎ ಮನವಿ ಮಾಡಬೇಕಿತ್ತು ಎಂದು ಅವರು ಹೇಳಿದರು.

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಬಳಿಕ ಆಯುಕ್ತರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಇದರ ಅರ್ಥವೇನು? ಜಿ ಕೆಟಗರಿ ನಿವೇಶನ ಹಂಚಿಕೆಯೇ ಅಕ್ರಮ. ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಅಕ್ರಮವಾಗಿ ನಿವೇಶನ ಪಡೆದ ವ್ಯಕ್ತಿಯು ಆರ್‌ಎಂವಿಯಲ್ಲಿ ಪರ್ಯಾಯ ನಿವೇಶನವನ್ನು ಪಡೆದಿದ್ದು ಹೇಗೆ ಎಂದು ನ್ಯಾಯಪೀಠವು ಪ್ರಶ್ನಿಸಿತು.

ಆಯುಕ್ತರು ಕೋವಿಡ್‌ ಪೀಡಿತರಾಗಿದ್ದಾರೆ. ಹಾಗಾಗಿ, ಅವರು ವಿಚಾರಣೆಗೆ ಹಾಜರಾಗಿಲ್ಲ ಎಂದು ಬಿಡಿಎ ಪರ ವಕೀಲರು ಹೇಳಿದರು. ಪ್ರಾಧಿಕಾರದಿಂದ ರಾಜೇಶ ಗೌಡ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು. ಅವರಿಗೆ ಸುಪ್ರೀಂ ಕೋರ್ಟ್‌ ಆದೇಶಗಳ ಬಗ್ಗೆ ಗೌರವವೇ ಇಲ್ಲ. ಇಂದಿನಿಂದ ಅವರು ಯಾವುದೇ ಪ್ರಮುಖ ಆದೇಶಗಳಿಗೆ ಸಹಿ ಹಾಕುವಂತಿಲ್ಲ. ಇದು ಕೋರ್ಟ್‌ನ ಆದೇಶ ಎಂದು ನ್ಯಾಯಪೀಠವು ಮೌಖಿಕವಾಗಿ ಹೇಳಿತು.

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಬಿಡಿಎ ಕಾರ್ಯದರ್ಶಿ ಹಾಗೂ ಉಪ ಕಾರ್ಯದರ್ಶಿಗಳನ್ನು ಸಹ ವರ್ಗಾವಣೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ನ್ಯಾಯಪೀಠವು ಹೇಳಿತು. ನಿವೇಶನದ ಅಕ್ರಮ ಹಂಚಿಕೆಯಲ್ಲಿ ಅವರೂ ಭಾಗಿಯಾಗಿದ್ದಾರೆ ಎಂದು ನ್ಯಾಯಪೀಠ ಹೇಳಿತು.

ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಯ 20ನೇ ವರದಿಯನ್ನು ಸಮಿತಿಯ ಪರವಾಗಿ ವಕೀಲ ಸಂಜಯ್‌ ಎಂ. ನುಲಿ ನ್ಯಾಯಪೀಠಕ್ಕೆ ಸಲ್ಲಿಸಿದರು.

ಹಿಂದಿನ ಲೇಖನರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
ಮುಂದಿನ ಲೇಖನಗೌರಿ-ಗಣೇಶ ಹಬ್ಬ: ಹೆಚ್ಚುವರಿಯಾಗಿ 500 ವಿಶೇಷ ಬಸ್‌ಗಳ ಸಂಚಾರ