ರಾಯಚೂರು/ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆಗಳ ಮೇಲೆ ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಏಕಕಾಲದಲ್ಲಿ ದಾಳಿ ನಡೆಸಿದರು.
ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಬಳ್ಳಾರಿಯ ನೆಹರು ಕಾಲೊನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ. ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್ಪಿಎಫ್ ಯೋಧರ ಸಹಕಾರದಿಂದ ದಾಳಿ ನಡೆಸಿದೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.