ಮನೆ ರಾಜ್ಯ ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್-3, ಜೆಡಿಎಸ್-2, ಬಿಜೆಪಿ-1 ಸ್ಥಾನದಲ್ಲಿ ಗೆಲುವು

ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್-3, ಜೆಡಿಎಸ್-2, ಬಿಜೆಪಿ-1 ಸ್ಥಾನದಲ್ಲಿ ಗೆಲುವು

0

ಬೆಂಗಳೂರು : ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಆರು ಸ್ಥಾನಗಳ ಪೈಕಿ ಆಡಳಿತರೂಢ ಕಾಂಗ್ರೆಸ್ ಪಕ್ಷವು ಮೂರು ಸ್ಥಾನಗಳಲ್ಲಿ, ಜೆಡಿಎಸ್-2 ಹಾಗೂ ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.

Join Our Whatsapp Group


ನಗರದ ಸರಕಾರಿ ಕಲಾ ಕಾಲೇಜಿನಲ್ಲಿ ಬೆಂಗಳೂರು ಪದವೀಧರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತಗಳ ಎಣಿಕೆ ಕಾರ್ಯ ಶುಕ್ರವಾರ ಮುಂಜಾನೆಯವರೆಗೆ ನಡೆಯಿತು.
ಈ ಹಿಂದೆ ಬಿಜೆಪಿ ತೆಕ್ಕೆಯಲ್ಲಿದ್ದ ಈ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ಬೆಂಗಳೂರು ಪದವೀಧರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ-36,729 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ(24,888 ಮತಗಳು) ಅವರನ್ನು 11,841 ಮತಗಳಿಂದ ಪರಾಭವಗೊಳಿಸಿದರು. ಈ ಕ್ಷೇತ್ರದಲ್ಲಿ ಒಟ್ಟು 80,080 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 8,482 ಮತಗಳು ತಿರಸ್ಕೃತಗೊಂಡಿದ್ದವು. ಆರು ಸುತ್ತುಗಳಲ್ಲಿ ನಡೆದ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೆ ಗೆಲುವಿನ ನಗೆ ಬೀರಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ 8909 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಡಾ.ವೈ.ಎ.ನಾರಾಯಣಸ್ವಾಮಿ(7142 ಮತಗಳು)ಯನ್ನು 1767 ಮತಗಳಿಂದ ಸೋಲುಣಿಸಿದರು. ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಈ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 6894 ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ತೀವ್ರ ಪೈಪೋಟಿ ನೀಡಿದ್ದರು.
7 ಸುತ್ತುಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದರು. ಈ ಕ್ಷೇತ್ರದಲ್ಲಿ ಒಟ್ಟು 24,106 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 704 ಮತಗಳು ತಿರಸ್ಕೃತಗೊಂಡವು.

ಈಶಾನ್ಯ ಪದವೀಧರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ 4,651 ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.
ಕಲಬುರಗಿ ನಗರದ ಗುಲಬರ್ಗಾ ವಿ.ವಿ.ಯ ಸಾದ್ವಿ ಶಿರೋಮಣಿ ಸಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಮತ ಎಣಿಕೆ ಕಾರ್ಯ ಶುಕ್ರವಾರ ಬೆಳಗ್ಗೆ 11 ಗಂಟೆ ವರೆಗೂ ನಿರಂತರವಾಗಿ ನಡೆಯಿತು.
ಪ್ರಥಮ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್-39,496, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್-35,050 ಪಡೆದಿದ್ದರು. ಒಟ್ಟು ಚಲಾವಣೆಯಾದ 1,09,031 ಮತಗಳ ಪೈಕಿ 96,518 ಮತಗಳು ಪುರಸ್ಕೃತವಾದರೆ, 12,513 ಮತಗಳು ತಿರಸ್ಕೃತವಾದವು. ಪುರಸ್ಕೃತವಾದ ಮತಗಳಲ್ಲಿ 48,260 ಮತಗಳನ್ನು ಗಳಿಸಿದವರು ವಿಜಯಿಯಾಗಲಿದ್ದಾರೆ ಎಂದು ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಕೋಟಾ ನಿಗದಿ ಮಾಡಿದರು.
ಎರಡನೇ ಪ್ರಾಶಸ್ತ್ಯ ಮತ ಎಣಿಕೆ ನಂತರ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್-43,484 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್-38,833 ಮತಗಳನ್ನು ಪಡೆದಿದ್ದರು. ಎರಡನೆ ಪ್ರಾಶಸ್ತ್ಯ ಮತ ಎಣಿಕೆ ನಂತರ ಗೆಲುವಿಗೆ ಅಗತ್ಯವಿದ್ದ ಕೋಟಾ ತಲುಪದಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚಿನ ಮತ ಪಡೆದ ಕಾರಣ ಚುನಾವಣಾಧಿಕಾರಿ ಚಂದ್ರಶೇಖರ್ ಪಾಟೀಲ್ ಅವರಿಗೆ ಗೆಲುವಿನ ಪ್ರಮಾಣ ಪತ್ರ ವಿತರಿಸುವ ಮೂಲಕ ಅಧಿಕೃತವಾಗಿ ಫಲಿತಾಂಶವನ್ನು ಘೋಷಿಸಿದರು.
ಮೈಸೂರಿನಲ್ಲಿ 3 ಕ್ಷೇತ್ರಗಳ ಮತ ಎಣಿಕೆ: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈಋತ್ಯ ಪದವೀಧರರ ಕ್ಷೇತ್ರದ ಮತಗಳ ಎಣಿಕೆ ಕಾರ್ಯವು ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆಯಿತು.
ದಕ್ಷಿಣ ಶಿಕ್ಷಕರ ಕ್ಷೇತ್ರ: ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ 10,823 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ(6,201 ಮತಗಳು) ಅವರನ್ನು 4622 ಮತಗಳ ಅಂತರದಿಂದ ಪರಾಭವಗೊಳಿಸಿದರು. ಈ ಕ್ಷೇತ್ರದಲ್ಲಿ ಒಟ್ಟು 20,549 ಮತಗಳ ಪೈಕಿ 18,989 ಮತಗಳು ಚಲಾವಣೆಗೊಂಡಿದ್ದವು.
ನೈಋತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮೊದಲ ಪ್ರಾಶಸ್ತ್ಯದ 9,829 ಮತಗಳನ್ನು ಪಡೆದಿದ್ದು, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್(4,562 ಮತಗಳು) ಅವರನ್ನು 5,267 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚಲಾವಣೆಯಾದ ಮತಗಳ ಪೈಕಿ 821 ಮತಗಳು ಅಸಿಂಧುಗೊಂಡವು.
ನೈಋತ್ಯ ಪದವೀಧರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 37,627 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್(13,516 ಮತಗಳು) ಅವರನ್ನು 24,111 ಮತಗಳ ಅಂತರದಿಂದ ಪರಾಭವಗೊಳಿಸಿದರು. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 7039 ಮತಗಳನ್ನು ಪಡೆದು ಸೋಲು ಅನುಭವಿಸಿದರು.

ಹಿಂದಿನ ಲೇಖನಮೈಸೂರು: ಜೂನ್ 10  ರಿಂದ 12 ರವರೆಗೆ ಮೂರು ದಿನಗಳ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ
ಮುಂದಿನ ಲೇಖನಮೈಸೂರು: ಗುಜರಿ ಅಂಗಡಿಯಲ್ಲಿ ವಿಷಾನಿಲ ಸೋರಿಕೆ, 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು