ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಎಲ್ಲ ಪಾಕಿಸ್ತಾನದ ಪ್ರಜೆಗಳು ದೇಶ ತೊರೆಯಬೇಕೆಂಬ ಕೇಂದ್ರ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.
ಜೊತೆಗೆ ತಮ್ಮ ವಿರುದ್ಧ ಬವಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಪಾಕಿಸ್ತಾನದ ಮೂವರು ಅಪ್ರಾಪ್ತ ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಪಾಕಿಸ್ತಾನದ ಬಲೂಚಿಸ್ತಾನದ ೮ ವರ್ಷದ ಕುಮಾರಿ ಬಿಬಿ ಯಾಮಿನಾ, ೪ ವರ್ಷದ ಮಾಸ್ಟರ್ ಮುಹಮ್ಮದ್ ಮುದಾಸ್ಸಿರ್ ಮತ್ತು ೩ ವರ್ಷದ ಮಾಸ್ಟರ್ ಮೊಹಮ್ಮದ್ ಯೂಸಫ್ ಎಂಬುವರು ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ರಜಾ ಕಾಲದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು. ಅಲ್ಲದೆ, ಕಾಶ್ಮೀರದ ಪಹಲ್ಗಾಮ್ನಲ್ಲಿ ಮಾರಕ ದಾಳಿಯಾಗಿದೆ. ದೇಶದ ಪ್ರಜೆಗಳ ರಕ್ಷಣೆಯಿಂದಾಗಿ ಪಾಕಿಸ್ತಾನಿ ನಿವಾಸಿಗಳು ದೇಶ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ಏನಿದು ಪಾಕಿಸ್ತಾನದ ಮಕ್ಕಳ ಪ್ರಕರಣ : ಅರ್ಜಿದಾರ ಮಕ್ಕಳ ತಾಯಿ ಭಾರತದವರಾಗಿದ್ದು ಷರಿಯತ್ ಕಾನೂನಿನ ಪ್ರಕಾರ ಪಾಕಿಸ್ತಾನದ ಪ್ರಜೆಯನ್ನು ವಿವಾಹವಾಗಿದ್ದರು. ಆದರೆ, ಪಾಕಿಸ್ತಾನದ ಪೌರತ್ವ ಪಡೆಯದೆ ಭಾರತದ ಪ್ರಜೆಯಾಗಿ ಮುಂದುವರೆದಿದ್ದಾರೆ. ಆದರೆ, ಅರ್ಜಿದಾರರು ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿರುವ ಪ್ರಜೆಗಳಾಗಿದ್ದು, ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ತಾಯಿಯೊಂದಿಗೆ ೨೦೨೫ರ ಜನವರಿ ೪ರಂದು ವೀಸಾ ಪಡೆದು ಭಾರತಕ್ಕೆ ಬಂದಿದ್ದರು. ಬಳಿಕ ೨೦೨೫ರ ಜೂನ್ ೧೮ರ ವರೆಗೂ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಜೂನ್ ೧೮ರಂದು ವೀಸಾ ಅವಧಿ ಮುಕ್ತಾಯವಾಗಲಿದೆ.
ಈ ನಡುವೆ ಪ್ರವಾಸಿಗರ ಮೇಲೆ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಗುಂಡಿನ ದಾಳಿ ಬಳಿಕ ಭಾರತದಲ್ಲಿ ವೀಸಾ ಪಡೆದು ನೆಲೆಸಿರುವ ಎಲ್ಲ ಪಾಕಿಸ್ತಾನದ ಪ್ರಜೆಗಳು ವೀಸಾ ಹಿಂದಿರುಗಿಸಬೇಕು. ೨೦೨೫ರ ಏಪ್ರಿಲ್ ೩೦ರ ಅಂತ್ಯದೊಳಗಾಗಿ ಭಾರತವನ್ನು ತೊರೆಯುವಂತೆ ಕೇಂದ್ರ ಸರ್ಕಾರದಿಂದ ಗಡುವು ವಿಧಿಸಲಾಗಿತ್ತು.
ಅದರಂತೆ ಅರ್ಜಿದಾರರು ೨೦೨೫ರ ಏಪ್ರಿಲ್ ೨೮ರಂದು ಪಾಕಿಸ್ತಾನಕ್ಕೆ ತೆರಳಲು ಅಟ್ಟಾರಿ ಗಡಿಗೆ ಹೋಗಿದ್ದು, ಅವರನ್ನು ತಮ್ಮ ದೇಶಕ್ಕೆ ಕರೆದುಕೊಳ್ಳಲು ಯಾರೂ ಬಾರದ ಕಾರಣ ಅವರಿಗೆ ಪಾಕಿಸ್ತಾನ ಪ್ರವೇಶಕ್ಕೆ ಅವಕಾಶ ನೀಡಿರಲಿಲ್ಲ. ಗಡಿಯ ದ್ವಾರವನ್ನು ಮುಚ್ಚಿದ್ದರು. ಪರಿಣಾಮ ಅವರು ಮತ್ತೆ ಮೈಸೂರಿಗೆ ಹಿಂದಿರುಗಿದ್ದರು. ಬಳಿಕ ಭಾರತದಲ್ಲಿ ಉಳಿಯಲು ದೀರ್ಘಾವಧಿ ವೀಸಾ ಮಂಜೂರು ಮಾಡುವಂತೆ ಇಲ್ಲವೇ ವೀಸಾ ಅವಧಿ ವಿಸ್ತರಣೆ ಮಾಡುವಂತೆ ಕೋರಿ ಮೈಸೂರಿನ ವಿದೇಶಿಗರ ನೋಂದಣಿ ಕಚೇರಿಗೆ ಮನವಿ ಮಾಡಿದ್ದು, ಮನವಿಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಆದರೆ, ದೇಶ ತೊರೆಯಲು ನೀಡಿರುವ ಸೂಚನೆಯಂತೆ ನಿಗದಿತ ಅವಧಿಯಲ್ಲಿ ದೇಶ ತೊರೆಯದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಆದ್ದರಿಂದ ವೀಸಾ ಅವಧಿ ವಿಸ್ತರಣೆ ಮಾಡಬೇಕು. ಇಲ್ಲವೇ ೨೦೨೫ರ ಮೇ ೧೫ರ ವರೆಗೂ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದರು.














