ಮನೆ ರಾಜ್ಯ ಚಿನ್ನ, ಮುದ್ದು, ಬಂಗಾರಿ ಎಂದ ಪೊಲೀಸಪ್ಪನಿಂದಲೇ ಮಹಿಳೆಗೆ ಕೊಲೆ ಬೆದರಿಕೆ..!

ಚಿನ್ನ, ಮುದ್ದು, ಬಂಗಾರಿ ಎಂದ ಪೊಲೀಸಪ್ಪನಿಂದಲೇ ಮಹಿಳೆಗೆ ಕೊಲೆ ಬೆದರಿಕೆ..!

0

ಬೆಂಗಳೂರು : ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್​ಸ್ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ.

ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿಯ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೆ, ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯು ವಾಟ್ಸಪ್ ಮೂಲಕ ಕಳುಹಿಸಿದ್ದ ಅಶ್ಲೀಲ ಸಂದೇಶಗಳು ಹಾಗೂ ಸಂಭಾಷಣೆಗಳ ಸ್ಕ್ರೀನ್‌ಶಾಟ್‌ಗಳನ್ನು ಕೂಡ ಪೊಲೀಸ್ ಆಯುಕ್ತರಿಗೆ ಆಸಂತ್ರಸ್ತೆ ಸಲ್ಲಿಸಿದ್ದಾರೆ. ಜೊತೆಗೆ, ಇನ್ಸ್‌ಪೆಕ್ಟರ್ ಮತ್ತು ದೂರುದಾರೆ ನಡುವೆ ನಡೆದಿದ್ದೆಂದು ಹೇಳಲಾಗುತ್ತಿರುವ ಆಡಿಯೋ ದಾಖಲೆಗಳನ್ನೂ ಕಮಿಷನರ್ ಕಚೇರಿಗೆ ನೀಡಿದ್ದಾರೆ.

ಈ ಪ್ರಕರಣ ಬಹಿರಂಗಪಡಿಸಿದರೆ ದೂರುದಾರೆಯನ್ನೂ ಅವರ ಮಕ್ಕಳನ್ನೂ ಸುಪಾರಿ ಕೊಟ್ಟು ಕೊಲೆ ಮಾಡಿಸುವುದಾಗಿ ಇನ್ಸ್‌ಪೆಕ್ಟರ್ ಪಾಪಣ್ಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲವಾರು ಬಾರಿ ಕರೆ ಮಾಡಿ ಮನೆಗೆ ಬರುವುದಾಗಿ ಹೇಳಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ. ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಿರುವ ಈ ದೂರಿನ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸುವ ಸಾಧ್ಯತೆ ಇದೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರೆ ಮನವಿ ಮಾಡಿದ್ದಾರೆ.

ಬೆಂಗಳೂರು ಪೊಲೀಸ್ ಇಲಾಖೆಯ ಸಿಬ್ಬಂದಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಇದೇ ಮೊದಲಲ್ಲ. ಈ ಹಿಂದೆ ಬೆಂಗಳೂರಿನ ವಿವಿಧ ಠಾಣೆಗಳ ಸಿಬ್ಬಂದಿ ಹಣ ದೋಚಲು ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿರುವುದು, ಕಮಿಷನರ್ ಕಚೇರಿ ವ್ಯಾಪ್ತಿಯಲ್ಲೇ ಡ್ರಗ್ಸ್ ದಂಧೆಗೆ ಸಹಕರಿಸಿದ್ದು ಮತ್ತು ಸುಲಿಗೆ ಪ್ರಕರಣಗಳಲ್ಲಿ ಶಾಮೀಲಾಗಿ ಅಮಾನತುಗೊಂಡಿರುವ ಅನೇಕ ನಿದರ್ಶನಗಳಿವೆ.

ವಿಶೇಷವಾಗಿ ವೈಟ್‌ಫೀಲ್ಡ್ ಮತ್ತು ಬನ್ನೇರುಘಟ್ಟ ಭಾಗದಲ್ಲಿ ಸಾರ್ವಜನಿಕರನ್ನು ಬೆದರಿಸಿ ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡ ಪ್ರಕರಣಗಳು ದೊಡ್ಡ ಸುದ್ದಿಯಾಗಿದ್ದವು. ಈಗ ರಕ್ಷಣೆಯ ಜವಾಬ್ದಾರಿ ಹೊತ್ತ ಅಧಿಕಾರಿಯೇ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವುದು ಇಲಾಖೆಯ ನೈತಿಕತೆಯ ಬಗ್ಗೆ ಪ್ರಶ್ನೆ ಮೂಡಿಸಿದೆ.