ಮನೆ ರಾಜ್ಯ ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ…!

ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ…!

0

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಕುರಿತು ತನಿಖೆ ನಡೆಸುವಂತೆ ಅಥವಾ ತನಿಖೆ ನಡೆಸಿದ್ದರೆ ಮಾಹಿತಿ ಹಂಚಿಕೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದೆ.

ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‌ಐಟಿ ರಚನೆ ಆದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ʻಚಿನ್ನಯ್ಯʼ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ.

ಉತ್ಖನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ, ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶದಕ್ಕೆ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಮತ್ತು ಅತ್ಯಾಚಾರ ಕೊಲೆ, ಪ್ರಕರಣಗಳನ್ನು ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ, ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚಧರಿ ಪತ್ರದಲ್ಲಿ ಕೋರಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದುಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್.ಟಿ ಹಾಗೂ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇತ್ತೀಚೆಗೆ ಹೈಕೋರ್ಟ್‌ನ ನ್ಯಾ.ಮಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದಲ್ಲಿ ನಡೆಯಿತು. ವಾದ ಪ್ರತಿವಾದಗಳನ್ನು ಆಲಿಸಿದ್ದ ಹೈಕೋರ್ಟ್‌ ನವೆಂಬರ್ 12ರವರೆಗೆ ತನಿಖೆಗೆ ತಡೆ ನೀಡಿ ಆದೇಶ ನೀಡಿದೆ.